Breaking News
Home / Breaking News / ಬೆಳಗಾವಿ ಜಿಲ್ಲೆಯಲ್ಲಿ ಮಳೆಯಿಂದ 400 ಕೋಟಿ ರೂ ಹಾನಿ…

ಬೆಳಗಾವಿ ಜಿಲ್ಲೆಯಲ್ಲಿ ಮಳೆಯಿಂದ 400 ಕೋಟಿ ರೂ ಹಾನಿ…

ಮನೆಹಾನಿ ತ್ವರಿತ ಸಮೀಕ್ಷೆ, ಪರಿಹಾರ ವಿತರಣೆ- ಉಸ್ತುವಾರಿ ಸಚಿವ ಕಾರಜೋಳ ಮೆಚ್ಚುಗೆ

ಬೆಳಗಾವಿ, -ಬೆಳೆಹಾನಿಯ ಬಗ್ಗೆ ಸಮೀಕ್ಷೆ ನಡೆಸುವಾಗ ರೈತರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಕ್ರಮ ಕೈಗೊಳ್ಳಬೇಕು. ಕೆಲವು ಕಡೆಗಳಲ್ಲಿ ಜಂಟಿ ಸಮೀಕ್ಷೆ ಬಳಿಕವೂ ಬೆಳೆಹಾನಿ ಬಗ್ಗೆ ವರದಿಯಾಗಿರುವುದರಿಂದ ಇವುಗಳನ್ನು ಸೇರ್ಪಡೆ ಮಾಡಿಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಸೂಚನೆ ನೀಡಿದರು.

ಇತ್ತೀಚಿನ ದಿನಗಳಲ್ಲಿ ಅತಿವೃಷ್ಟಿಯಿಂದ ಉಂಟಾಗಿರುವ ಹಾನಿ ಹಾಗೂ ಕೈಗೊಂಡ ಪರಿಹಾರ ಕ್ರಮಗಳ ಕುರಿತು ನಗರದ ಪ್ರವಾಸಿಮಂದಿರದಲ್ಲಿ ಶನಿವಾರ(ಸೆ.17) ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಅತಿವೃಷ್ಟಿಯಿಂದ ಜಮೀನುಗಳಲ್ಲಿ ನೀರು ಹೆಚ್ಚು ದಿನಗಳ ಕಾಲ‌ ನಿಂತ ಪರಿಣಾಮ ತೋಟಗಾರಿಕೆ ಹಾಗೂ ತರಕಾರಿ ಬೆಳೆಗಳು ಸಂಪೂರ್ಣ ನಾಶಗೊಂಡಿರುತ್ತದೆ. ಆದ್ದರಿಂದ ಸಮೀಕ್ಷೆ ನಡೆಸುವಾಗ ಈ ಅಂಶಗಳನ್ನು ಪರಿಗಣಿಸಬೇಕು ಎಂದು ಕೃಷಿ ಮತ್ತು ತೋಟಗಾರಿಕೆ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲೆಯಲ್ಲಿ 400 ಕೋಟಿ ರೂಪಾಯಿ ಹಾನಿ:

ಜಿಲ್ಲೆಯಲ್ಲಿ ಇತ್ತೀಚಿನ ಅತಿವೃಷ್ಟಿಯಿಂದ ಒಟ್ಟಾರೆ 400 ಕೋಟಿ ರೂಪಾಯಿ ಹಾನಿಯಾಗಿದ್ದು, ಸದ್ಯಕ್ಕೆ ಎನ್.ಡಿ.ಆರ್.ಎಫ್. ಮಾರ್ಗಸೂಚಿ ಪ್ರಕಾರ 105 ಕೋಟಿ ರೂಪಾಯಿ ಹಾನಿಯ ಕುರಿತು ವರದಿ ಸಲ್ಲಿಕೆಯಾಗಿರುತ್ತದೆ.

ಮನೆಹಾನಿ ತುರ್ತು ಸಮೀಕ್ಷೆ, ಪರಿಹಾರ-ಸಚಿವರ ಮೆಚ್ಚುಗೆ:

ಈ ಬಾರಿ ಮನೆಹಾನಿಯ ಸಮೀಕ್ಷೆಯನ್ನು ಅತ್ಯಂತ ತ್ವರಿತವಾಗಿ ಹಾಗೂ ಪಾರದರ್ಶಕವಾಗಿ ಕೈಗೊಂಡು ಪರಿಹಾರ ಕೂಡ ಜಮೆ ಮಾಡಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಸಚಿವ ಗೋವಿಂದ ಕಾರಜೋಳ ಅವರು, ಇದಕ್ಕಾಗಿ ಜಿಲ್ಲಾಡಳಿತ ಹಾಗೂ ಸಂಬಂಧಿಸಿದ ಎಲ್ಲ ಇಲಾಖೆಯ ಅಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿದರು.
ಅಧಿಕಾರಿಗಳು ಮತ್ತು ಸಿಬ್ಬಂದಿ ಕೊರತೆಯ ಮಧ್ಯೆಯೂ ಅತ್ಯುತ್ತಮ ಕೆಲಸ ಮಾಡಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು.

ಬೋಗಸ್ ಪ್ರಕರಣ-ಎಚ್ಚರಿಕೆ ವಹಿಸಲು ಸೂಚನೆ:

ಬೆಳೆಹಾನಿ ಹಾಗೂ ಮನೆಹಾನಿಯ ಸಮೀಕ್ಷೆ ಮಾಡುವಾಗ ಯಾವುದೇ ಕಾರಣಕ್ಕೂ ಬೋಗಸ್ ಪ್ರಕರಣವನ್ನು ಸೇರ್ಪಡೆಯಾಗದಂತೆ ಎಚ್ಚರಿಕೆ ವಹಿಸಬೇಕು.
ಸಮೀಕ್ಷೆ ನಡೆಸುವಾಗ ಸಾಧ್ಯವಾದಷ್ಟು ರೈತರು ಮತ್ತು ಕುಟುಂಬದ ಜನರ ಸಮ್ಮುಖದಲ್ಲಿ ಮಾಡಬೇಕು ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು.

ಗಡಿಭಾಗದ ಜನರು ಆರೋಗ್ಯ ಸೌಲಭ್ಯಕ್ಕಾಗಿ ನೆರೆಯ ರಾಜ್ಯಗಳಿಗೆ ತೆರಳುತ್ತಿದ್ದಾರೆ. ಆದ್ದರಿಂದ ಅಂತಹ ಜನರಿಗೆ ನಮ್ಮ ಜಿಲ್ಲೆಯಲ್ಲಿ ಅತ್ಯುತ್ತಮ ಆರೋಗ್ಯ ಸೌಲಭ್ಯಗಳನ್ನು ಒದಗಿಸಲು ಅನುಕೂಲವಾಗುವಂತೆ ಆಸ್ಪತ್ರೆ ನಿರ್ಮಾಣಕ್ಕೆ ಪ್ರಸ್ತಾವ ಸಲ್ಲಿಸುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು.

ವಿಮಾನ ನಿಲ್ದಾಣ ರಸ್ತೆ; ಪ್ರಸ್ತಾವನೆ:

ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣ ರಸ್ತೆಯನ್ನು ಚತುಷ್ಪಥವನ್ನಾಗಿ ಪರಿವರ್ತಿಸಲು ಡಿಪಿಆರ್ ಸಿದ್ಧವಾಗಿರುತ್ತದೆ. ಈ ಬಗ್ಗೆ ಮುಖ್ಯಮಂತ್ರಿಗಳ ಜತೆ ಚರ್ಚಿಸಿ ಒಪ್ಪಿಗೆ ಪಡೆಯಲಾಗುವುದು ಎಂದು ಸಚಿವ ಗೋವಿಂದ ಕಾರಜೋಳ ತಿಳಿಸಿದರು.

ಚಿಕ್ಕೋಡಿಯಲ್ಲಿ 250 ಹಾಸಿಗೆಗಳ ಆಸ್ಪತ್ರೆ ಪ್ರಸ್ತಾವ ಸಲ್ಲಿಕೆಗೆ ಸೂಚಿಸಲಾಗಿದೆ.
ಬೆಳಗಾವಿ-ಧಾರವಾಡ ರೈಲು ಮಾರ್ಗ ನಿರ್ಮಾಣಕ್ಕಾಗಿ ಹೆಚ್ಚುವರಿಯಾಗಿ ಇನ್ನೂ 30 ಕೋಟಿ ರೂಪಾಯಿ ಅನುದಾನ ನೀಡಲಾಗಿದೆ.
ಬಳ್ಳಾರಿ ‌ನಾಲಾ ಸಮಸ್ಯೆ ಪರಿಹಾರಕ್ಕಾಗಿ ಶಾಶ್ವತ ಯೋಜನೆ ರೂಪಿಸುವ ಕೆಲಸ ನಡೆದಿದೆ‌ ಎಂದು ತಿಳಿಸಿದರು.

ಅತಿವೃಷ್ಟಿಯಿಂದ 105 ಕೋಟಿ ಹಾನಿ-ವರದಿ ಸಲ್ಲಿಕೆ:

ಜಿಲ್ಲೆಯಲ್ಲಿ ಇತ್ತೀಚಿನ ಅತಿವೃಷ್ಟಿಯಿಂದ ಮನೆಹಾನಿ, ಬೆಳೆಹಾನಿ ಹಾಗೂ ಮೂಲಸೌಕರ್ಯಗಳ ಹಾನಿ ಸೇರಿದಂತೆ ಒತ್ಟಾರೆ ಅಂದಾಜು 400 ಕೋಟಿ ರೂಪಾಯಿ ಹಾನಿಯಾಗಿರುತ್ತದೆ. ಆದರೆ ಎನ್.ಡಿ.ಆರ್.ಎಫ್. ಮಾರ್ಗಸೂಚಿಯಂತೆ 105 ಕೋಟಿ ರೂಪಾಯಿ ಹಾನಿ ಕುರಿತು ವರದಿ ಸಲ್ಲಿಸಲಾಗಿರುತ್ತದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದರು.

ಜಿಲ್ಲೆಯಲ್ಲಿ ಗೋಡೆ ಕುಸಿದು, ಸಿಡಿಲು ಬಡಿದು ಹಾಗೂ ಮರ ಬಿದ್ದು ಹೀಗೆ ಐದು ಜನರು ಪ್ರಾ ಕಳೆದುಕೊಂಡಿರುತ್ತಾರೆ. ಈಗಾಗಲೇ ತಲಾ ಐದು ಲಕ್ಷ ಪರಿಹಾರ ನೀಡಲಾಗಿರುತ್ತದೆ.

ಜುಲೈ-ಆಗಸ್ಟ್ ಬೆಳೆಹಾನಿಯಾಗಿರುವುದನ್ನು ಜಂಟಿ ಸಮೀಕ್ಷೆ ಕೈಗೊಂಡು ಕೂಡಲೇ 17.01 ಕೋಟಿ ರೂಪಾಯಿ ಪರಿಹಾರವನ್ನು ಜಮೆ‌ ಮಾಡಲಾಗಿರುತ್ತದೆ.
ಸೆಪ್ಟೆಂಬರ್ ಮಾಹೆಯಲ್ಲಿ ಉಂಟಾಗಿರುವ ಹಾನಿಯ ಸಮೀಕ್ಷೆ ಕೈಗೊಂಡು ಕೂಡಲೇ ಪರಿಹಾರ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.
ಅತಿವೃಷ್ಟಿಯಿಂದ 678 ಮನೆಗಳಿಗೆ ನೀರು ನುಗ್ಗಿದ್ದರಿಂದ ಸರಕಾರದ ಮಾರ್ಗಸೂಚಿ ಪ್ರಕಾರ ಪ್ರತಿ ಕುಟುಂಬಕ್ಕೆ ತಲಾ ಹತ್ತು ಸಾವಿರ ರೂಪಾಯಿ ಪರಿಹಾರ ಕೂಡ ನೀಡಲಾಗಿದೆ.

ಜಿಲ್ಲೆಯಲ್ಲಿ ಜೂನ್ ಮಾಹೆಯಲ್ಲಿ ಶೇ.21 ಕಡಿಮೆ ಮಳೆಯಾಗಿತ್ತು. ಜುಲೈನಲ್ಲಿ ಶೇ. 41ಅಧಿಕ ಹಾಗೂ ಆಗಸ್ಟ್ ನಲ್ಲಿ ಶೇ. 39‌ ಅಧಿಕ ಮಳೆಯಾದರೆ ಸೆಪ್ಟೆಂಬರ್ ಮಾಹೆಯಲ್ಲಿ ವಾಡಿಕೆಗಿಂತ ಅಧಿಕ ಮಳೆಯಿಂದ ಹಾನಿ ಉಂಟಾಗಿರುತ್ತದೆ ಎಂದು ವಿವರಿಸಿದರು.
ಪ್ರಸಕ್ತ ಸಾಲಿನಲ್ಲಿ ಮನೆಹಾನಿ ಸಮೀಕ್ಷೆ ಅತ್ಯಂತ ಪಾರದರ್ಶಕವಾಗಿ ಸಮೀಕ್ಷೆ ಕೈಗೊಳ್ಳಲಾಗಿದೆ. ಯಾವುದೇ ದೂರುಗಳಿಲ್ಲ ಎಂದು ತಿಳಿಸಿದರು.

ಬೆಳಗಾವಿ ನಗರ ಪೊಲೀಸ್ ಆಯುಕ್ತರಾದ ಡಾ.ಎಂ.ಬಿ.ಬೋರಲಿಂಗಯ್ಯ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದರ್ಶನ್, ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಉಪ ವಿಭಾಗಾಧಿಕಾರಿಗಳಾದ ರವೀಂದ್ರ ಕರಲಿಂಗಣ್ಣವರ, ಶಶಿಧರ್ ಬಗಲಿ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ ಸೇರಿದಂತೆ ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
***

Check Also

ಧಾರವಾಡ ಕಾಂಗ್ರೆಸ್ ಅಭ್ಯರ್ಥಿ ಬದಲಾದ್ರೆ ಬೆಳಗಾವಿಗೂ ಎಫೆಕ್ಟ್…?

ಬೆಳಗಾವಿ -ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬದಲಾವಣೆ ಆಗಬೇಕು ಎನ್ನುವ ಬೇಡಿಕೆ ಕಾಂಗ್ರೆಸ್ ನಲ್ಲಿಯೇ ಹೆಚ್ಚಾಗಿದೆ.ಜೊತೆಗೆ ಅಭ್ಯರ್ಥಿ ಬದಲಿಸಿ …

Leave a Reply

Your email address will not be published. Required fields are marked *