Breaking News
Home / Breaking News / ಬೆಳಗಾವಿ ರಸ್ತೆಗಳ ಸುಧಾರಣೆಗೆ 200 ಕೋಟಿ ಕೊಡದಿದ್ದರೆ ಬೆಳಗಾವಿ ಬಂದ್ ಗೆ ಕರೆ ,ಬಿಜೆಪಿ ಎಚ್ಚರಿಕೆ

ಬೆಳಗಾವಿ ರಸ್ತೆಗಳ ಸುಧಾರಣೆಗೆ 200 ಕೋಟಿ ಕೊಡದಿದ್ದರೆ ಬೆಳಗಾವಿ ಬಂದ್ ಗೆ ಕರೆ ,ಬಿಜೆಪಿ ಎಚ್ಚರಿಕೆ

ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ರಸ್ತೆಗಳೆಲ್ಲವೂ ಹದಗೆಟ್ಟು ಹೋಗಿದ್ದು, ಈ ರಸ್ತೆಗಳ ದುರಸ್ತಿಗೆ ರಾಜ್ಯ ಸರ್ಕಾರ ಅನುದಾನ ನೀಡದಿದ್ದರೆ ಬೆಳಗಾವಿ ಬಂದ್‌ಗೆ ಕರೆ ನೀಡಲಾಗುವುದು ಎಂದು ಬೆಳಗಾವಿ ದಕ್ಷಿಣ ಶಾಸಕ ಅಭಯ ಪಾಟೀಲ ಅವರು ಇಂದಿಲ್ಲಿ ಎಚ್ಚರಿಕೆ ನೀಡಿದ್ದಾರೆ.

ಸಂಸದರ ಗೃಹ ಕಚೇರಿಯಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ರಸ್ತೆಗಳನ್ನು ದುರಸ್ತಿ ಮಾಡದಿದ್ದರೆ ಚಳಿಗಾಲದ ಅಧಿವೇಶನ ನಡೆಸುವುದು ಕಠಿಣವಾಗುತ್ತದೆ. ಮುಂದಾಗುವ ಅನಾಹುತಗಳಿಗೆ ರಾಜ್ಯ ಸರ್ಕಾರವೇ ಹೊಣೆಯಾಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ನಗರದ ಪ್ರಮುಖ ರಸ್ತೆಗಳು ಸೇರಿದಂತೆ ಎಲ್ಲ ರಸ್ತೆಗಳು ಸಂಪೂರ್ಣವಾಗಿ ಹದಗೆಟ್ಟುಹೋಗಿವೆ. ಈ ರಸ್ತೆಗಳಿಂದ ನಾಗರಿಕರು ರೋಸಿ ಹೋಗಿದ್ದಾರೆ. ಕೂಡಲೇ ರಾಜ್ಯ ಸರ್ಕಾರ ೨೦೦ ಕೋಟಿ ಅನುದಾನ ನೀಡಬೇಕು.  ಈ ಕುರಿತು ಸಂಬಂಧಿತ ಅಧಿಕಾರಿಗಳಿಗೆ ನಾಲ್ಕು ಬಾರಿ ಪತ್ರ ಬರೆದರೂ ಅದಕ್ಕೆ ಇನ್ನೂ ಉತ್ತರವೇ ಬಂದಿಲ್ಲ. ಸರ್ಕಾರ ಕೂಡಲೇ ರಸ್ತೆ ದುರಸ್ತಿಗೆ ಅನುದಾನವನ್ನು ಬಿಡುಗಡೆ ಮಾಡಬೇಕು. ಇಲ್ಲದಿದ್ದರೆ ಅಧಿವೇಶನ ನಡೆಸುವುದು ಕಠಿಣವಾಗುತ್ತದೆ ಎಂಬುದನ್ನು ಸರ್ಕಾರ ಅರಿತುಕೊಳ್ಳಬೇಕು ಎಂದರು.

ಸಂಸದ ಸುರೇಶ ಅಂಗಡಿ ಮಾತನಾಡಿ, ನಗರದ ರಸ್ತೆಗಳೆಲ್ಲವು ಹಾಳಾಗಿದ್ದು, ಸರ್ಕಾರ ಈ ಬಗ್ಗೆ ಕಾಳಜಿವಹಿಸುತ್ತಿಲ್ಲ. ರಾಜ್ಯದ ರೈತರ ನೆರವಿಗೆ ಕೇಂದ್ರ ಸರ್ಕಾರ ಬೆಳೆಗಳಿಗೆ ಬೆಂಬಲ ಬೆಲೆ ಘೋಷಣೆ ಮಾಡಿದೆ. ಆದರೆ, ಅವುಗಳನ್ನು ಖರೀದಿ ಮಾಡುವಲ್ಲಿ ಸರ್ಕಾರ ನಿರ್ಲಕ್ಷವಹಿಸಿದೆ. ಕೂಡಲೇ ಖರೀದಿ ಕೇಂದ್ರಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಬೇಕು. ರೈತರ ವಿಚಾರದಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ನಿಷ್ಕಾಳಜಿ ವಹಿಸಿದೆ ಎಂದು ಆರೋಪಿಸಿದರು.

ಸ್ಮಾರ್ಟಸಿಟಿ ಯೋಜನೆಗೆ ಸಂಬಂಧ ಆ. ೨೫ ರಂದು ನಡೆಯುವ ಸಭೆಗೆ ಇದೇ ಮೊದಲ ಬಾರಿಗೆ ಶಾಸಕರು ಹಾಗೂ ಸಂಸದರನ್ನು ಆಹ್ವಾನಿಸಲಾಗಿದೆ. ಸ್ಮಾರ್ಟಸಿಟಿ ಯೋಜನೆ ಕಾಮಗಾರಿ ವಿಳಂಬವಾಗುತ್ತಲೇ ಸಾಗಿದೆ .ಯಾವುದೇ ಕಾರಣಕ್ಕೂ ಸ್ಮಾರ್ಟಸಿಟಿ ಕಾಮಗಾರಿಯನ್ನು ದೆಹಲಿಯಿಂದ ಬರುವ ಗುತ್ತಿಗೆದಾರರಿಗೆ ನೀಡಬಾರದು. ಸ್ಥಳೀಯ ಗುತ್ತಿಗೆದಾರರಿಗೆ ನೀಡಬೇಕು. ಇದರಿಂದಾಗಿ ಸ್ಥಳೀಯರಿಗೆ ಉದ್ಯೋಗ ಸೃಷ್ಟಿಯಾಗುತ್ತದೆ ಎಂದರು.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮತ,  ಸುರೇಶ  ಅಂಗಡಿಗೆ ಇಲ್ಲ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿಗರೇ ಅಭಿಯಾನ ಆರಂಭಿಸಿರುವ ಕುರಿತು ಪತ್ರಕರ್ತರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಚುನಾವಣೆಗೆ ಸ್ಪರ್ಧಿಸಲು ಯಾರಿಗೆ ಟಿಕೆಟ್ ನೀಡಬೇಕು ಎನ್ನುವುದು ಪಕ್ಷಕ್ಕೆ ಬಿಟ್ಟಿದ್ದು. ಈ ಹಿಂದೆ ವಿಧಾನಸಭೆ ಚುನಾವಣೆಯಲ್ಲಿ ಕೆಲವರಿಗೆ ಟಿಕೆಟ್ ಕೊಡಬಾರದು ಎಂದು ಹೇಳಿದ್ದರು. ಗೆಲ್ಲುವ ಅಭ್ಯರ್ಥಿಗಳಿಗೆ ಪಕ್ಷ ಟಿಕೆಟ್ ನೀಡುತ್ತದೆ. ಯಾರೇ ನಮ್ಮ ವಿರುದ್ಧ ಅಪಪ್ರಚಾರ ಮಾಡುವವರು ಮಾಡಲಿ, ಅವರ ಬಗ್ಗೆ ನಾನೇನು ಹೆಚ್ಚಿಗೆ ಹೇಳುವುದಿಲ್ಲ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಶಾಸಕ ಅನಿಲ ಬೆನಕೆ, ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ವಿಶ್ವನಾಥ ಪಾಟೀಲ, ಬಿಜೆಪಿ ಯುವಮೋರ್ಚಾ ರಾಜ್ಯ ಉಪಾಧ್ಯಕ್ಷ ರಾಜು ಚಿಕ್ಕನಗೌಡರ ಮೊದಲಾದವರು ಇದ್ದರು.

Check Also

ಹೃದಯಾಘಾತದಿಂದ ನರೇಗಾ ಕಾರ್ಮಿಕ ಸಾವು

ಬೈಲಹೊಂಗಲ: ತಾಲ್ಲೂಕಿನ ವಕ್ಕುಂದ ಗ್ರಾಮದಲ್ಲಿ ಕೂಲಿ ಕಾರ್ಮಿಕರೊಬ್ಬರು ಹೃದಯಾಘಾತದಿಂದ ಸ್ಥಳದಲ್ಲಿಯೇ ಸೋಮವಾರ ಸಾವನ್ನಪ್ಪಿದ್ದಾರೆ. ಮಲ್ಲೇಶ ಲಕ್ಷ್ಮಣ ಸಂಬರಗಿ (55) ಮೃತ …

Leave a Reply

Your email address will not be published. Required fields are marked *