Home / Breaking News / ನಿವೃತ್ತ ಜಿಲ್ಲಾಧಿಕಾರಿ ಡಾ.ಬೊಮ್ಮನಹಳ್ಳಿ ಅವರಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ

ನಿವೃತ್ತ ಜಿಲ್ಲಾಧಿಕಾರಿ ಡಾ.ಬೊಮ್ಮನಹಳ್ಳಿ ಅವರಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ

ಬೆಳಗಾವಿ,-ಬೆಳಗಾವಿ, ಸಾರ್ವಜನಿಕರು, ಜನಪ್ರತಿನಿಧಿಗಳು ಸೇರಿದಂತೆ ಎಲ್ಲರ ಸಹಕಾರದಿಂದ ಎಂದೂ ಕಂಡರಿಯದ ಪ್ರವಾಹ ಪರಿಸ್ಥಿತಿ ಹಾಗೂ ಕೊರೊನಾದಂತಹ ಕ್ಲಿಷ್ಟಕರ ಪರಿಸ್ಥಿತಿಯನ್ನು ಅತ್ಯಂತ ಸಮರ್ಥವಾಗಿ ನಿಭಾಯಿಸುವುದು ಸಾಧ್ಯವಾಯಿತು ಎಂದು ನಿವೃತ್ತ ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಹೇಳಿದರು.

ನಗರದ ಗಾಂಧಿ ಭವನದಲ್ಲಿ ಮಂಗಳವಾರ ನಡೆದ ಬೀಳ್ಕೊಡುಗೆ ಹಾಗೂ ನೂತನ ಜಿಲ್ಲಾಧಿಕಾರಿ ಸ್ವಾಗತ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ಎಂತಹದ್ದೇ ಸಂದರ್ಭ ಬಂದರೂ ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಮನಸ್ಸು ಮಾಡಿದರೆ ಯಶಸ್ವಿಯಾಗಿ ನಿಭಾಯಿಸಬಲ್ಲರು ಎಂಬುದಕ್ಕೆ ಕೊರೊನಾ ಮತ್ತು ಪ್ರವಾಹ ಸ್ಥಿತಿ ಸಾಕ್ಷಿಯಾಗಿದೆ.

ಬೆಳಗಾವಿ ಜಿಲ್ಲೆಯಲ್ಲಿನ ಸೇವೆ ನನ್ನ ಜೀವನದಲ್ಲಿ ಮರೆಯಲಾಗದ ಕ್ಷಣಗಳು ಎಂದು ಭಾವುಕರಾಗಿ ಹೇಳಿದರು.

ಈ ಸಂದರ್ಭದಲ್ಲಿ ಧೈರ್ಯ ಮತ್ತು ಆತ್ಮಸ್ಥೈರ್ಯ ತುಂಬಿದ ಪತ್ನಿಗೆ ಸೆಲ್ಯೂಟ್ ಸಲ್ಲಿಸುತ್ತೇನೆ ಎಂದರು.
ಕೆಲಸವನ್ನು ಸಂಭ್ರಮಿಸಿದಾಗ ಕೆಲಸ ಬೇಸರ ಎನಿಸುವುದಿಲ್ಲ. ಅದೇ ರೀತಿ ‌ನಾನು ಕೆಲಸವನ್ನು ಸಂಭ್ರಮಿಸಿದ್ದೇನೆ.
ರಾಜ್ಯದ ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಕೆಲಸ ಮಾಡುವ ಅಪರೂಪದ ಅವಕಾಶಗಳನ್ನು ಮೂವರು ಮುಖ್ಯಮಂತ್ರಿಗಳು ಒದಗಿಸಿದ್ದಾರೆ.
ಮುಖ್ಯಮಂತ್ರಿಗಳು, ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಜಿಲ್ಲೆಯ ಜನರ ಪ್ರೀತಿ-ವಿಶ್ವಾಸಕ್ಕೆ ನಾನು ಚಿರ ಋಣಿಯಾಗಿದ್ದೇನೆ.

ಕೊನೆಯ ಉಸಿರು ಇರುವವರೆಗೆ ಎಲ್ಲರ ಈ ಪ್ರೀತಿ-ವಿಶ್ವಾಸ ನನಗೆ ಸ್ಫೂರ್ತಿಯಾಗಿದೆ ಎಂದು ನಿಕಟಪೂರ್ವ ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಹೇಳಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ನೂತನ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ನಿವೃತ್ತ ಜಿಲ್ಲಾಧಿಕಾರಿ ಡಾ.ಬೊಮ್ಮನಹಳ್ಳಿ ಅವರೊಂದಿಗಿನ‌ ಒಡನಾಟ ಮತ್ತು ಅವರ ಸೇವಾನುಭವವನ್ನು ಸ್ಮರಿಸಿದರು.

ಜಿಲ್ಲೆಯ ಅಧಿಕಾರಿಗಳು ಅದೇ ರೀತಿಯ ಸಹಕಾರ ನೀಡುತ್ತೀರಿ ಎಂಬ ಆಶಯವನ್ನು ವ್ಯಕ್ತಪಡಿಸಿದರು.

ಬೆಳಗಾವಿ ನನ್ನ ಜಿಲ್ಲೆ. ನನ್ನ ಊರಿನಲ್ಲಿ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸುವ ಸದವಕಾಶ ನನಗೆ ಲಭಿಸಿದೆ. ಇದನ್ನು ಸದುಪಯೋಗ ಮಾಡಿಕೊಂಡು ಜಿಲ್ಲೆಗೆ ಕೀರ್ತಿ ತರುತ್ತೇನೆ ಎಂದರು.

ಅಧಿಕಾರಿಗಳು ಮತ್ತು ಸಿಬ್ಬಂದಿ ಮೇಲೆ ವಿಶ್ವಾಸವಿಟ್ಟು ಕೆಲಸ ಮಾಡುವುದು ಮುಖ್ಯವೇ ಹೊರತು ಕ್ರಮ ತೆಗೆದುಕೊಳ್ಳುವುದು ಮುಖ್ಯವಲ್ಲ.

ಎಲ್ಲರ ಸಹಕಾರದಿಂದ ಉತ್ತಮ ಕೆಲಸ ಮಾಡುವ ವಿಶ್ವಾಸ ವ್ಯಕ್ತಪಡಿಸಿದರು.

ಜಿಲ್ಲಾ ಪಂಚಾಯತ ಸಿಇಓ ಡಾ.ರಾಜೇಂದ್ರ ಕೆ.ವಿ.ಅವರು, ಡಾ.ಬೊಮ್ಮನಹಳ್ಳಿ ಅವರ ಆಡಳಿತದ ಅನುಭವ ತಮಗೆ ದೊಡ್ಡ ಪಾಠವಾಗಿದೆ ಎಂದು ಅಭಿಪ್ರಾಯಪಟ್ಟರು.

ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.
ಸ್ಮಾರ್ಟ್ ಸಿಟಿ ಯೋಜನೆಯ ವ್ಯವಸ್ಥಾಪಕ ನಿರ್ದೇಶಕ ಶಶಿಧರ್ ಕುರೇರ್ ವಂದಿಸಿದರು.

ಜಿಲ್ಲಾ ಪೊಲಿಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಮತ್ತಿತರರು ಉಪಸ್ಥಿತರಿದ್ದರು.
*””

Check Also

28 ರಂದು ಪ್ರಧಾನಿ ನರೇಂದ್ರ ಮೋದಿ ಬೆಳಗಾವಿಗೆ..

ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಚುನಾವಣೆಯ ರಂಗೇರಿದೆ ಕರ್ನಾಟಕದ ದಕ್ಷಿಣ ಭಾಗದಲ್ಲಿ ಚುನಾವಣಾ ಪ್ರಚಾರದ ಅವಧಿ ಮುಕ್ತಾಯವಾಗುವ ಹಂತದಲ್ಲಿ ವಿವಿಧ ರಾಜಕೀಯ …

Leave a Reply

Your email address will not be published. Required fields are marked *