Breaking News
Home / Breaking News / ಜನತಾ ದರ್ಶನದಲ್ಲಿ ಸಾರ್ವಜನಿಕರ ದಂಡು….!!

ಜನತಾ ದರ್ಶನದಲ್ಲಿ ಸಾರ್ವಜನಿಕರ ದಂಡು….!!

ಬೆಳಗಾವಿ,-ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಬೆಂಗಳೂರಿಗೆ ಅಲೆದಾಡುವುದನ್ನು ತಪ್ಪಿಸಲು ಸ್ಥಳೀಯ ಮಟ್ಟದಲ್ಲಿ ಜನತಾ ದರ್ಶನವನ್ನು ಹಮ್ಮಿಕೊಳ್ಳಲಾಗುತ್ತಿದೆ. ಜನರು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಕರ್ನಾಟಕ ಸರಕಾರದ ನವದೆಹಲಿ ವಿಶೇಷ ಪ್ರತಿನಿಧಿ-2 ಪ್ರಕಾಶ್ ಹುಕ್ಕೇರಿ ಅವರು ಹೇಳಿದರು.

ನಗರದ ಕೆಪಿಟಿಸಿಎಲ್ ಸಮುದಾಯ ಭವನದಲ್ಲಿ ಮಂಗಳವಾರ(ಸೆ.26) ನಡೆದ ಜನತಾ ದರ್ಶನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಜನರ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಜಿಲ್ಲಾಡಳಿತವು ಸಾಕಷ್ಟು ಪ್ರಯತ್ನ ಮಾಡುತ್ತಿದೆ. ಆದಾಗ್ಯೂ ಜನರ ಅಲೆದಾಟವನ್ನು ತಪ್ಪಿಸುವುದಕ್ಕಾಗಿ ಮುಖ್ಯಮಂತ್ರಿಗಳ ಆಶಯದಂತೆ ಜನತಾದರ್ಶನ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಆಸಿಫ್(ರಾಜು) ಸೇಠ್, ಜನರು ಜನತಾ ದರ್ಶನದಲ್ಲಿ ಪಾಲ್ಗೊಂಡು ತಮ್ಮ ಸಮಸ್ಯೆಗಳನ್ನು ಸ್ಥಳೀಯವಾಗಿಯೇ ಪರಿಹರಿಸಿಕೊಳ್ಳುವುದು ಸಾಧ್ಯವಾಗಲಿದೆ ಎಂದರು.ಜಿಲ್ಲಾಧಿಕಾರಿಗಳು ಸೇರಿದಂತೆ ಎಲ್ಲ ಅಧಿಕಾರಿಗಳು ಲಭ್ಯವಾಗುವುದರಿಂದ ಜನರು ತಮ್ಮ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.

ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಪ್ರತಿ ತಿಂಗಳು ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಹಾಗೂ ಪ್ರತಿ ಹದಿನೈದು ದಿನಗಳಿಗೊಮ್ಮೆ ತಾಲ್ಲೂಕು ಮಟ್ಟದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಜನತಾ ದರ್ಶನ ನಡೆಸಲಾಗುವುದು ಎಂದು ಹೇಳಿದರು.
ಜನರ ಅಹವಾಲುಗಳನ್ನು ಸ್ಥಳೀಯವಾಗಿಯೇ ಪರಿಹರಿಸುವುದು ಜನತಾ ದರ್ಶನದ ಉದ್ಧೇಶವಾಗಿದೆ. ಜನರ ಅಹವಾಲು ಸ್ವೀಕರಿಸಲು ಎಂಟು ಕೌಂಟರ್ ಗಳನ್ನು ಆರಂಭಿಸಲಾಗಿದೆ. ಇಲ್ಲಿ ಸ್ವೀಕೃತವಾಗುವ ಅರ್ಜಿಗಳು ಐಪಿಜಿಆರ್ ಎಸ್ ಪೋರ್ಟಲ್ ನಲ್ಲಿ ದಾಖಲಿಸಲಾಗುತ್ತದೆ.
ಜಿಲ್ಲಾಮಟ್ಟದಲ್ಲಿ ಬಗೆಹರಿಸಬಹುದಾದ ಅರ್ಜಿಗಳನ್ನು ತಕ್ಷಣವೇ ವಿಲೇವಾರಿ ಮಾಡಲಾಗುವುದು. ರಾಜ್ಯ ಸರಕಾರದ ಹಂತದಲ್ಲಿ ಬಗೆಹರಿಸಬಹುದಾದ ಅರ್ಜಿಗಳನ್ನು ಮುಂದಿನ ಕ್ರಮಕ್ಕಾಗಿ ಕಳುಹಿಸಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.

ಬೆಳಗಾವಿಯ ಕೆಪಿಟಿಸಿಎಲ್ ಭವನದಲ್ಲಿ ನಡೆದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಒಟ್ಟಾರೆ 713 ಅರ್ಜಿಗಳು ಸ್ವೀಕೃತವಾಗಿರುತ್ತವೆ.ಸದರಿ ಅರ್ಜಿಗಳನ್ನು ಐಪಿಜಿಆರ್ ಎಸ್ ಪೋರ್ಟಲ್ ನಲ್ಲಿ ಅಪ್ ಲೋಡ್ ಮಾಡಲಾಗಿರುತ್ತದೆ.

ಕಿತ್ತೂರು ಶಾಸಕ ಬಾಬಾಸಾಹೇಬ್ ಪಾಟೀಲ, ಸವದತ್ತಿ ಶಾಸಕ ವಿಶ್ವಾಸ್ ವೈದ್ಯ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಲ್ ಭೋಯರ್, ಅಪರ ಜಿಲ್ಲಾಧಿಕಾರಿ ವಿಜಕುಮಾರ್ ಹೊನಕೇರಿ, ಮಹಾನಗರ ಪಾಲಿಕೆ ಆಯುಕ್ತರಾದ ಅಶೋಕ ದುಡಗುಂಟಿ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಬಸವರಾಜ ಹೆಗ್ಗನಾಯಕ, ಡಿಸಿಪಿ ರೋಹನ ಜಗದೀಶ್, ಚಿಕ್ಕೋಡಿ ಉಪ ವಿಭಾಗಾಧಿಕಾರಿ ಮಾಧವ ಗಿತ್ತೆ, ಐಎಎಸ್ ಪ್ರೊಬೇಷನರಿ ಅಧಿಕಾರಿ ಶುಭಂ ಶುಕ್ಲಾ ಮತ್ತಿತರರು ಉಪಸ್ಥಿತರಿದ್ದರು.

ಜಿಲ್ಲೆಯ ವಿವಿಧೆಡೆಯಿಂದ ಆಗಮಿಸಿದ್ದ ಸಾರ್ವಜನಿಕರು ವೇದಿಕೆಗೆ ಆಗಮಿಸಿ ಅಹವಾಲುಗಳನ್ನು ಸಲ್ಲಿಸಿದರು. ಇದಲ್ಲದೇ ಸಭಾಭವನದಲ್ಲಿ ಸ್ಥಾಪಿಸಲಾಗಿದ್ದು ಎಂಟು ಕೌಂಟರ್ ಗಳಲ್ಲಿ ತಮ್ಮ ಅಹವಾಲುಗಳನ್ನು ಸಲ್ಲಿಸಿದರು.
***

Check Also

ಬೆಳಗಾವಿ ಏರ್ ಪೋರ್ಟಿನಲ್ಲಿ ಸಿದ್ರಾಮಯ್ಯ ವಿಮಾನ ಲ್ಯಾಂಡಿಂಗ್ ನಿರಾಕರಣೆ.

ಬೆಳಗಾವಿ-ಸಿಎಂ ಸಿದ್ದರಾಮಯ್ಯ ವಿಶೇಷ ವಿಮಾನಕ್ಕೆ ಬೆಳಗಾವಿ ವಿಮಾನ ನಿಲ್ದಾಣ ಎಂಟ್ರಿಗೆ ನಿರಾಕರಿಸಲಾಗಿದೆ ಸಿಎಂ ಆಗಮನ ಸಂದರ್ಭದಲ್ಲಿ ಪ್ರಧಾನಿ ಮೋದಿ ನಿರ್ಗಮನ …

Leave a Reply

Your email address will not be published. Required fields are marked *