Breaking News
Home / Breaking News / ಕರಾಳ ದಿನಾಚರಣೆಗೆ ಕನ್ನಡ ಸಂಘಟನೆಗಳ ಆಕ್ಷೇಪ

ಕರಾಳ ದಿನಾಚರಣೆಗೆ ಕನ್ನಡ ಸಂಘಟನೆಗಳ ಆಕ್ಷೇಪ

ಬೆಳಗಾವಿ – ಕರಾಳ ದಿನಾಚರಣೆಗೆ ಅನುಮತಿ ನೀಡುವದಾದರೆ,ರಾಜ್ಯೋತ್ಸವದ ಸಭೆ ಕರೆಯಬೇಡಿ,ಕರಾಳ ದಿನಾಚರಣೆಗೆ ಅನುಮತಿ ನೀಡುವದಿಲ್ಲ ಅಂತಾ ರಾತ್ರೋ ರಾತ್ರಿ ಅನುಮತಿ ಕೊಡ್ತೀರಾ,ಈ ಬಗ್ಗೆ ಜಿಲ್ಲಾಡಳಿತ ನಿಲುವು ತಿಳಿಸಿ ಆಮೇಲೆ ಸಭೆ ನಡೆಸಿ ಎಂದು ಕರವೇ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ ಪಟ್ಟು ಹಿಡಿದರು.

ಸರಳ, ಸಾಂಕೇತಿಕ ರಾಜ್ಯೋತ್ಸವ: ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ

ಕೋವಿಡ್ -19 ಹಿನ್ನೆಲೆಯಲ್ಲಿ ಈ ಬಾರಿ ಕರ್ನಾಟಕ ರಾಜ್ಯೋತ್ಸವವನ್ನು ಸರಳ ಹಾಗೂ ಸಾಂಕೇತಿಕವಾಗಿ ಆಚರಣೆ ಮಾಡಲಾಗುವುದು. ರಾಜ್ಯೋತ್ಸವದಲ್ಲಿ ಪೋಲಿಸ್ ಪರೇಡ್ ಗೆ ಮಾತ್ರ ಅವಕಾಶವಿದ್ದು, ಯಾವುದೇ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಮೆರವಣಿಗೆಗೆ ಅವಕಾಶ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶನಿವಾರ (ಅ.17) ನಡೆದ ರಾಜ್ಯೋತ್ಸವ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನಗರದ ಸಿ.ಪಿ.ಎಡ್ ಮೈದಾನದಲ್ಲಿ ತಾಯಿ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ನಂತರ ನಗರದ ಚೆನ್ನಮ್ಮ ವೃತ್ತದಲ್ಲಿರುವ ಚನ್ನಮ್ಮನ ಪುತ್ಥಳಿಗೆ ಜಿಲ್ಲಾಡಳಿತ ವತಿಯಿಂದ ಮಾಲಾರ್ಪಣೆ ಮಾಡಿ ಪೂಜೆ ಸಲ್ಲಿಸಲಾಗುವುದು ಎಂದು ಹೇಳಿದರು.

ಕನ್ನಡ ರಾಜ್ಯೋತ್ಸವ ಕಳೆಗುಂದದಿರಲಿ:

ಬೆಳಗಾವಿಯಲ್ಲಿ ಆಚರಿಸಲಾಗುವ ರಾಜ್ಯೋತ್ಸವವು ಇಡೀ ರಾಜ್ಯದಲ್ಲಿ ಪ್ರಸಿದ್ಧಿ ಪಡೆದಿದೆ. ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ಸರಳವಾಗಿ ಆಚರಿಸಿದರೂ ಅರ್ಥಪೂರ್ಣವಾಗಿ ಆಚರಿಸಲು ಕ್ರಮಕೈಗೊಳ್ಳಬೇಕು. ಕನ್ನಡ ನಾಡು-ನುಡಿ ರಕ್ಷಣೆಗೆ ಶ್ರಮಿಸಿದ ಮಹನೀಯರ ಕುರಿತು ಆನ್ ಲೈನ್ ಮೂಲಕ ವಿಚಾರ ಸಂಕಿರಣ(ವೆಬಿನಾರ್) ಅಥವಾ ಸಂವಾದ ಕಾರ್ಯಕ್ರಮಗಳನ್ನು ಜಿಲ್ಲಾಡಳಿತದಿಂದ ಹಮ್ಮಿಕೊಳ್ಳಬೇಕು ಎಂದು ಕನ್ನಡಪರ ಹೋರಾಟಗಾರ ಮೆಹಬೂಬ್ ಮಕಾನದಾರ ಸಲಹೆ ನೀಡಿದರು.

ಹಿರಿಯ ಕನ್ನಡಪರ ಹೋರಾಟಗಾರರು ಮತ್ತು ಪತ್ರಕರ್ತರನ್ನು ಗುರುತಿಸಿ, ಸನ್ಮಾನಿಸಲು ಹಿರಿಯರ ಸಮಿತಿಯನ್ನು ರಚಿಸಬೇಕು ಎಂದರು.

ಇದೇ ವೇಳೆ ಮಾತನಾಡಿದ ಹಿರಿಯ ಕನ್ನಡಪರ ಹೋರಾಟಗಾರರಾದ ಅಶೋಕ ಚಂದರಗಿ ಅವರು, ನಗರದಲ್ಲಿನ ಅಂಗಡಿ ಮುಂಗಟ್ಟುಗಳ ಫಲಕಗಳು ಕನ್ನಡ ಭಾಷೆಯಲ್ಲಿ ಕಡ್ಡಾಯವಾಗಿ ಬರೆಯಬೇಕು ಇಲ್ಲವಾದರೆ ಅಂತಹ ಅಂಗಡಿ ಮುಂಗಟ್ಟುಗಳ ಪರವಾನಿಗೆ ರದ್ದು ಮಾಡಬೇಕು ಎಂದು ಒತ್ತಾಯಿಸಿದರು.

ಪೋಲಿಸ್ ಇಲಾಖೆಯು ಸಾರ್ವಜನಿಕರಿಗೆ ವಿಧಿಸುವ ದಂಡಗಳ ಆದೇಶ ಮತ್ತು ವಸೂಲಾತಿ ರಶೀದಿ ಕನ್ನಡ ಭಾಷೆಯಲ್ಲಿ ಮುದ್ರಿಸಬೇಕು ಎಂದು ಪೊಲೀಸ್ ಆಯುಕ್ತರಿಗೆ ಚಂದರಗಿ‌ ಮನವಿ ಮಾಡಿಕೊಂಡರು.

ಕರಾಳ ದಿನಾಚರಣೆಗೆ ಅನುಮತಿ‌ ಬೇಡ:

ಕನ್ನಡ ರಾಜ್ಯೋತ್ಸವ ದಿನದಂದು ಕೆಲ ಸಂಘಟನೆಗಳು ಕರಾಳ ದಿನಾಚರಣೆ ಆಚರಿಸಲು ಮುಂದಾಗಿದ್ದು, ಯಾವುದೇ ಕಾರಣಕ್ಕೂ ಅದಕ್ಕೆ ಅನುಮತಿ ನೀಡಬಾರದು ಎಂದು ಎಲ್ಲ ಕನ್ನಡ ಸಂಘಟನೆಗಳ ಪರವಾಗಿ ಅಶೋಕ ಚಂದರಗಿ ಮನವಿ ಮಾಡಿಕೊಂಡರು.
ಸಮಾಜದ ಸ್ವಾಸ್ಥ್ಯಕ್ಕಾಗಿ ಹಗಲಿರುಳು ಶ್ರಮಿಸುತ್ತಿರುವ ಕೊರೊನಾ ವಾರಿಯರ್ಸ್ ಗಳಿಗೆ ಕರ್ನಾಟಕ ರಾಜ್ಯೋತ್ಸವದ ಸಂದರ್ಭದಲ್ಲಿ ಗೌರವಿಸಬೇಕು ಎಂದೂ ಅವರು ಸಲಹೆ ನೀಡಿದರು.

ಕೋವಿಡ್-19 ಸೋಂಕಿನಿಂದ ಇತ್ತೀಚಿಗೆ ಮೃತರಾದ ರೈಲ್ವೆ ಇಲಾಖೆಯ ರಾಜ್ಯ ಸಚಿವ ಸುರೇಶ್ ಅಂಗಡಿ ಹಾಗೂ ಕನ್ನಡ ಪರ ಹೋರಾಟಗಾರರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿ, ಮೌನ ಆಚರಿಸಲಾಯಿತು.

ಜಿಲ್ಲಾ ಪಂಚಾಯತ ಅಧ್ಯಕ್ಷೆ ಆಶಾ ಐಹೊಳೆ, ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಘೂಳಪ್ಪ ಹೊಸಮನಿ, ಬೆಳಗಾವಿ ನಗರ ಪೋಲಿಸ್ ಆಯುಕ್ತರಾದ ಕೆ.ತ್ಯಾಗರಾಜನ್, ಉಪ ಪೊಲೀಸ್ ಆಯುಕ್ತರಾದ ವಿಕ್ರಮ್ ಆಮಟೆ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ದರ್ಶನ ಎಚ್.ವಿ, ಅಪರ ಜಿಲ್ಲಾಧಿಕಾರಿ ಅಶೋಕ ದುಟಗುಂಟಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ವಿದ್ಯಾವತಿ ಭಜಂತ್ರಿ ಹಾಗೂ ವಿವಿಧ ಕನ್ನಡ ಪರ ಹೋರಾಟಗಾರರು ಸಭೆಯಲ್ಲಿ ಭಾಗವಹಿಸಿದ್ದರು.
****

Check Also

ಧಾರವಾಡ ಕಾಂಗ್ರೆಸ್ ಅಭ್ಯರ್ಥಿ ಬದಲಾದ್ರೆ ಬೆಳಗಾವಿಗೂ ಎಫೆಕ್ಟ್…?

ಬೆಳಗಾವಿ -ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬದಲಾವಣೆ ಆಗಬೇಕು ಎನ್ನುವ ಬೇಡಿಕೆ ಕಾಂಗ್ರೆಸ್ ನಲ್ಲಿಯೇ ಹೆಚ್ಚಾಗಿದೆ.ಜೊತೆಗೆ ಅಭ್ಯರ್ಥಿ ಬದಲಿಸಿ …

Leave a Reply

Your email address will not be published. Required fields are marked *