Breaking News
Home / Breaking News / ನಾಳೆ ರಿಸಲ್ಟಗೆ ಎಲ್ಲಾ ತಯಾರಿ ಆಗೈತ್ರಿಪ್ಪೋ….ಹೊಡಿ ಒಂಬತ್ತ್…!!!

ನಾಳೆ ರಿಸಲ್ಟಗೆ ಎಲ್ಲಾ ತಯಾರಿ ಆಗೈತ್ರಿಪ್ಪೋ….ಹೊಡಿ ಒಂಬತ್ತ್…!!!

ಮತ ಎಣಿಕೆಗೆ ಸಿದ್ಧತೆ ಪೂರ್ಣ; ಬಿಗಿ ಭದ್ರತೆ- ಡಾ.ಬೊಮ್ಮನಹಳ್ಳಿ

ಬೆಳಗಾವಿ, : ಜಿಲ್ಲೆಯ ಮೂರು ಮತಕ್ಷೇತ್ರಗಳ ಮತ ಎಣಿಕೆ ನಗರದ ಆರ್.ಪಿ.ಡಿ. ಮಹಾವಿದ್ಯಾಲಯದಲ್ಲಿ ಸೋಮವಾರ(ಡಿ.೯) ನಡೆಯಲಿದ್ದು, ಭದ್ರತೆ ಸೇರಿದಂತೆ ಮತ ಎಣಿಕೆಗೆ ಸಂಪೂರ್ಣ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ತಿಳಿಸಿದರು.

ಮತ ಎಣಿಕೆ ಸಿದ್ಧತೆ ಕುರಿತು ಭಾನುವಾರ (ಡಿ.೮) ಬೆಳಿಗ್ಗೆ ಮತ ಎಣಿಕೆ ಕೇಂದ್ರದ ಆವರಣದ ಮಾಧ್ಯಮ ಕೇಂದ್ರದಲ್ಲಿ ನಡೆದ ಎಲ್ಲ ನೋಡಲ್ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಭದ್ರತೆ, ಪಾರ್ಕಿಂಗ್, ಮತ ಎಣಿಕೆ ಸಿಬ್ಬಂದಿ ಗುರುತಿನಚೀಟಿ, ಅಂತರ್ಜಾಲ ಸಂಪರ್ಕ, ಅಗತ್ಯ ಉಪಕರಣಗಳನ್ನು ಒದಗಿಸುವಿಕೆ, ಅಂಚೆ ಮತ ಎಣಿಕೆ, ಚುನಾವಣಾ ವೀಕ್ಷಕರ ಕೊಠಡಿ, ಮಾಹಿತಿ ಕೇಂದ್ರ, ಊಟೋಪಹಾರ ವ್ಯವಸ್ಥೆಯ ಬಗ್ಗೆ ಸಂಬಂಧಿಸಿದ ಅಧಿಕಾರಿಗಳಿಂದ ಮಾಹಿತಿಯನ್ನು ಪಡೆದುಕೊಂಡರು.

ತುರ್ತು ವೈದ್ಯಕೀಯ ಸೌಲಭ್ಯಕ್ಕಾಗಿ ಅಂಬ್ಯುಲೆನ್ಸ್ ಸೌಲಭ್ಯ, ಅಗ್ನಿಶಾಮಕ ದಳ ನಿಯೋಜನೆಯನ್ನು ಖಚಿತಪಡಿಸುವಂತೆ ಸೂಚನೆ ನೀಡಿದರು.

ಸಾರ್ವಜನಿಕರಿಗೆ ಮತ ಎಣಿಕೆ ಮಾಹಿತಿಯನ್ನು ನೀಡಲು ಆರ್.ಪಿ.ಡಿ. ಮುಖ್ಯದ್ವಾರ ಅಥವಾ ಕ್ರಾಸ್ ಹಾಗೂ ಪಾರ್ಕಿಂಗ್ ಸ್ಥಳದಲ್ಲಿ ಧ್ವನಿವರ್ಧಕ ವ್ಯವಸ್ಥೆ ಕಲ್ಪಿಸಬೇಕು ಎಂದು ತಿಳಿಸಿದರು.

ಪ್ರತಿ ಕ್ಷೇತ್ರಕ್ಕೆ ೧೪ ಟೇಬಲ್ ವ್ಯವಸ್ಥೆ:
ಪ್ರತಿ ಮತಕ್ಷೇತ್ರದ ಮತ ಎಣಿಕೆಗೆ ೧೪ ಟೇಬಲ್ ವ್ಯವಸ್ಥೆ ಮಾಡಲಾಗಿರುತ್ತದೆ. ಆಯಾ ಮತಕ್ಷೇತ್ರಗಳ ಮತಗಟ್ಟೆ ಸಂಖ್ಯೆ ಆಧಾರದಲ್ಲಿ ಗರಿಷ್ಠ ೨೧ ಸುತ್ತಿನಲ್ಲಿ ಮತ ಎಣಿಕೆ ಪೂರ್ಣಗೊಳ್ಳಲಿದೆ. ಚುನಾವಣಾ ಆಯೋಗದ ಅನುಮತಿಯ ನಂತರವೇ ಫಲಿತಾಂಶ ಘೋಷಣೆ ಮಾಡಲಾಗುತ್ತದೆ ಎಂದು ಡಾ.ಬೊಮ್ಮನಹಳ್ಳಿ ಅವರು ತಿಳಿಸಿದರು.

೮ ಗಂಟೆಯಿಂದ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಲಿದ್ದು, ಈ ಬಗ್ಗೆ ಅಭ್ಯರ್ಥಿಗಳಿಗೆ ಮಾಹಿತಿ ನೀಡಲಾಗಿದ್ದು, ಅವರು ಕೂಡ ಏಜೆಂಟರನ್ನು ನಿಯೋಜಿಸಿರುತ್ತಾರೆ.
ಮತ ಎಣಿಕೆ ಕುರಿತು ಚುನಾವಣಾಧಿಕಾರಿ ನೀಡುವ ವಿವರರವನ್ನು ಆಯಾ ಕ್ಷೇತ್ರದ ಸಾಮಾನ್ಯ ವೀಕ್ಷಕರು ದೃಢೀಕರಿಸಿದ ಬಳಿಕ ಪ್ರತಿ ಸುತ್ತಿನ ಎಣಿಕೆ ವಿವರವನ್ನು ಪ್ರಕಟಿಸಲಾಗುತ್ತದೆ ಎಂದರು.

ಮೊಬೈಲ್ ಫೋನ್ ನಿಷೇಧ:
ಮತ ಎಣಿಕೆ ಕೇಂದ್ರದಲ್ಲಿ ಮೊಬೈಲ್ ಫೋನ್ ಬಳಕೆಯನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಆದ್ದರಿಂದ ಯಾರೂ ಮೊಬೈಲ್ ಫೋನ್ ಗಳನ್ನು ತರಬಾರದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಮಾಧ್ಯಮದವರಿಗೆ ಮೊಬೈಲ್ ಬಳಕೆಗೆ ಅವಕಾಶ ನೀಡಲಾಗಿದ್ದು, ಅವರು ಮಾಧ್ಯಮ ಕೇಂದ್ರಗಳಲ್ಲಿ ಮಾತ್ರ ಮೊಬೈಲ್ ಬಳಸಲು ಅವಕಾಶವಿದೆ.
ಯಾವುದೇ ಕಾರಣಕ್ಕೂ ಮತ ಎಣಿಕೆ ಕೊಠಡಿಗಳಿಗೆ ಮೊಬೈಲ್ ಫೋನ್ ಕೊಂಡೊಯ್ಯಲು ಅವಕಾಶವಿಲ್ಲ ಎಂದು ಡಾ.ಬೊಮ್ಮನಹಳ್ಳಿ ಸ್ಪಷ್ಟಪಡಿಸಿದರು.

ಇದಕ್ಕೂ ಮುಂಚೆ ಮಾತನಾಡಿದ ಪೊಲೀಸ್ ಆಯುಕ್ತರಾದ ಬಿ.ಎಸ್.ಲೋಕೇಶ್ ಕುಮಾರ್ ಅವರು, ಮತ ಎಣಿಕೆ ಕೇಂದ್ರಕ್ಕೆ ಮೂರು ಹಂತದ ಭದ್ರತೆ ಕಲ್ಪಿಸಲಾಗಿದೆ ಎಂದು ತಿಳಿಸಿದರು.

ಮತ ಎಣಿಕೆ ಕೇಂದ್ರದಲ್ಲಿ ಅಧಿಕಾರಿಗಳು ಸೇರಿದಂತೆ ಒಟ್ಟಾರೆ ೭೫೦ ಜನರನ್ನು ಭದ್ರತೆಗೆ ನಿಯೋಜಿಸಲಾಗಿದೆ.
ಬೆಳಗಾವಿ ತಾಲ್ಲೂಕಿನಲ್ಲಿ ೧೪೪ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಮದ್ಯ ಮಾರಾಟ ಕೂಡ ನಿಷೇಧಿಸಲಾಗಿದೆ.
ಒಟ್ಟಾರೆ ಶಾಂತಿಯುತ ಮತ ಎಣಿಕೆಗೆ ಎಲ್ಲ ಅಗತ್ಯ ಕ್ರಮ ಕೈಗೊಳ್ಳಲಾಗಿದೆ.

ವೀಕ್ಷಕರು ಹಾಗೂ ನಾಲ್ಕು ಜನರ ಹಿರಿಯ ಅಧಿಕಾರಿಗಳ ವಾಹನಗಳಿಗೆ ಮಾತ್ರ ಮತ ಎಣಿಕೆ ಕೇಂದ್ರದ ಆವರಣದಲ್ಲಿ ಪ್ರವೇಶ. ‌ಉಳಿದ ವಾಹನಗಳನ್ನು ಮೈದಾನದಲ್ಲಿ ಒದಗಿಸಿರುವ ನಿಗದಿತ ಸ್ಥಳದಲ್ಲಿ ಮಾತ್ರ ಪಾರ್ಕಿಂಗ್ ಅವಕಾಶವಿರುತ್ತದೆ ಎಂದು ಪೊಲೀಸ್ ಆಯುಕ್ತರಾದ ಬಿ.ಎಸ್.ಲೋಕೇಶ್ ಕುಮಾರ್ ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಡಿಸಿಪಿ ಸೀಮಾ ಲಾಟ್ಕರ್, ಯಶೋಧಾ ಒಂಟಗೋಡಿ, ಅಪರ ಜಿಲ್ಲಾಧಿಕಾರಿ ಎಂ.ಸತೀಶ್ ಕುಮಾರ್, ಗೋಕಾಕ ಮತಕ್ಷೇತ್ರದ ಚುನಾವಣಾಧಿಕಾರಿ ಭೂಬಾಲನ್, ಅಥಣಿ ಮತಕ್ಷೇತ್ರದ ಜಿಲಾನಿ ಮೊಖಾಶಿ, ಕಾಗವಾಡ ಚುನಾವಣಾಧಿಕಾರಿ ಗೋಪಾಲಕೃಷ್ಣ ಸಣ್ಣತಂಗಿ, ಎನ್.ಐ.ಸಿ ಅಧಿಕಾರಿ ಸಂಜೀವ ಕ್ಷೀರಸಾಗರ, ವಾರ್ತಾಧಿಕಾರಿ ಗುರುನಾಥ ಕಡಬೂರ ಮತ್ತಿತರರು ಉಪಸ್ಥಿತರಿದ್ದರು.
****

Check Also

ಸುಳ್ಳು ಹೇಳಿ ನಿಮ್ಮನ್ನು ಬಕ್ರಾ ಮಾಡುವ ಮೋದಿಗೆ ಅಧಿಕಾರ ಕೊಡಬೇಡಿ- ಸಿದ್ರಾಮಯ್ಯ

ಸುಳ್ಳು ಹೇಳುವ ಪ್ರಧಾನಿ ಮೋದಿಗೆ ಅಧಿಕಾರ ನೀಡಬೇಡಿ: ಸಿಎಂ ಸಿದ್ದರಾಮಯ್ಯ ಕಾಗವಾಡ ತಾಲೂಕಿನ ಉಗಾರ ಖುರ್ದನ ವಿಹಾರ ಮೈದಾನದಲ್ಲಿ ಹಮ್ಮಿಕೊಂಡ …

Leave a Reply

Your email address will not be published. Required fields are marked *