Breaking News
Home / ಬೆಳಗಾವಿ ನಗರ / ವೇದಿಕೆಗೆ ಹಕ್ಕ-ಬುಕ್ಕ ಹೆಸರಿಡಲು ನಿರ್ಧಾರ ವಾಲ್ಮೀಕಿ ಜಯಂತಿ ವಿಜೃಂಭಣೆಯಿಂದ ಆಚರಣೆ: ಜಯರಾಮ್

ವೇದಿಕೆಗೆ ಹಕ್ಕ-ಬುಕ್ಕ ಹೆಸರಿಡಲು ನಿರ್ಧಾರ ವಾಲ್ಮೀಕಿ ಜಯಂತಿ ವಿಜೃಂಭಣೆಯಿಂದ ಆಚರಣೆ: ಜಯರಾಮ್

ಬೆಳಗಾವಿ: ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಜಿಲ್ಲಾಮಟ್ಟದಲ್ಲಿ ಹಾಗೂ ಎಲ್ಲ ತಾಲ್ಲೂಕು ಕೇಂದ್ರಗಳಲ್ಲಿ ಅಕ್ಟೋಬರ್ 15ರಂದು ಶ್ರದ್ಧಾಭಕ್ತಿ ಹಾಗೂ ಸಡಗರ-ಸಂಭ್ರಮದಿಂದ ಆಚರಿಸಲು ನಿರ್ಧರಿಸಲಾಯಿತು.
ವಾಲ್ಮೀಕಿ ಜಯಂತಿ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ಎನ್.ಜಯರಾಮ್ ಈ ವಿಷಯ ತಿಳಿಸಿದರು.
ಜಿಲ್ಲಾಮಟ್ಟದ ಕಾರ್ಯಕ್ರಮವನ್ನು ಬೆಳಗಾವಿ ನಗರದ ಗಾಂಧಿ ಭವನದಲ್ಲಿ ಹಮ್ಮಿಕೊಳ್ಳಲಲು ನಿರ್ಧರಿಸಲಾಗಿದ್ದು, ಪ್ರತಿವರ್ಷದಂತೆ ವಾಲ್ಮೀಕಿ ಭಾವಚಿತ್ರದ ಮೆರವಣಿಗೆಯನ್ನು ವಿಜೃಂಭಣೆಯಿಂದ ನಡೆಸಲಾಗುವುದು ಎಂದರು.
ಮೆರವಣಿಗೆಯಲ್ಲಿ ಕಲಾತಂಡಗಳ ಜತೆಗೆ ಸರ್ಕಾರದ ವಿವಿಧ ಇಲಾಖೆಗಳ ಅಭಿವೃದ್ಧಿ ಯೋಜನೆಗಳ ಮಾಹಿತಿ ಹೊಂದಿರುವ ಸ್ತಬ್ಧಚಿತ್ರಗಳನ್ನು ಕಳುಹಿಸಲು ಕ್ರಮ ತೆಗೆದುಕೊಳ್ಳಲಾಗುವುದು.
ಅದೇ ರೀತಿ ಕಾರ್ಯಕ್ರಮದ ಸಂದರ್ಭದಲ್ಲಿ ಪ್ರತಿಭಾ ಪುರಸ್ಕಾರ, ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ವಿತರಣೆ ಹಾಗೂ ಪರಿಶಿಷ್ಟ ಪಂಗಡದ ಮಕ್ಕಳಿಗೆ ಸರ್ಕಾರದಿಂದ ಲಭ್ಯವಿರುವ ಸೌಲಭ್ಯಗಳನ್ನು ಸಾಂಕೇತಿಕವಾಗಿ ವಿತರಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಯರಾಮ್ ವಿವರಿಸಿದರು.

ಹಕ್ಕ-ಬುಕ್ಕ ವೇದಿಕೆ:
ವಾಲ್ಮೀಕಿ ಸಮಾರಂಭದ ಮುಖ್ಯ ವೇದಿಕೆಗೆ ವಿಜಯನಗರ ಸಾಮ್ರಾಜ್ಯದ ಸಂಸ್ಥಾಪಕರಾದ ವಾಲ್ಮೀಕಿ ಸಮಾಜದ ಹಕ್ಕ-ಬುಕ್ಕ ಅವರ ಹೆಸರು ಇಡಬೇಕು ಎಂದು ಸಭೆಯಲ್ಲಿ ಉಪಸ್ಥಿತರಿದ್ದ ಅನೇಕ ಜನರು ಸಲಹೆ ನೀಡಿದರು.
ಇದಕ್ಕೆ ಒಪ್ಪಿಗೆ ಸೂಚಿಸಿದ ಜಿಲ್ಲಾಧಿಕಾರಿಗಳು ಮುಖ್ಯ ವೇದಿಕೆಗೆ ಹಕ್ಕ-ಬುಕ್ಕರ ಹೆಸರು ಇಡುವುದಾಗಿ ಭರವಸೆ ನೀಡಿದರು.

ಕನ್ನಡ ಸಂಘಟನೆಯ ಅಧ್ಯಕ್ಷ ಮಹಾದೇವ ತಳವಾರ ಹಾಗೂ ಸುರೇಶ ಅವರು ಮಾತನಾಡಿ, ವಾಲ್ಮೀಕಿ ಜಯಂತಿಯನ್ನು ಕೇವಲ ಒಂದು ಸಮಾಜಕ್ಕೆ ಸೀಮಿತಗೊಳಿಸದೇ ಜಾತ್ಯತೀತವಾಗಿ ಆಚರಿಸುವಂತಾಗಬೇಕು ಎಂದು ಸಲಹೆ ನೀಡಿದರು.
ಪ್ರತಿವರ್ಷದಂತೆ ವಾಲ್ಮೀಕಿ ಜಯಂತಿಯಲ್ಲಿ ಭಾಗವಹಿಸುವವರಿಗೆ ಊಟದ ವ್ಯವಸ್ಥೆ ಮಾಡುವುದಾಗಿ ಅರವಿಂದ ಸಭೆಗೆ ತಿಳಿಸಿದರು.
ಜಯಂತಿ ಆಚರಣೆಗೆ ಅನುದಾನ ಹೆಚ್ಚಳ ಮಾಡುವಂತೆ ಸಮಾಜದ ಮುಖಂಡರು ಆಗ್ರಹಿಸಿದರು. ಅದೇ ರೀತಿ ಬೆಳಗಾವಿಯಲ್ಲಿರುವ ವೈದ್ಯಕೀಯ ಮಹಾವಿದ್ಯಾಲಯ(ಬಿಮ್ಸ್)ಕ್ಕೆ ವಾಲ್ಮೀಕಿ ಹೆಸರು ಇಡುವಂತೆ ಕೆಲವರು ಮನವಿ ಮಾಡಿಕೊಂಡರು.

Check Also

ಜಿಲ್ಲೆಯಲ್ಲಿ ಸುರಿದ ಮೊದಲ ಮಳೆಗೆ ಮೊದಲ ಬಲಿ…

ಬೆಳಗಾವಿ- ಸವದತ್ತಿಯಲ್ಲಿ ಧಾರಾಕಾರ ಮಳೆ ಸುರಿದಿದ್ದು ಸಿಡಿಲು ಬಡಿದು ಬೈಕ್ ಸವಾರನೊಬ್ಬ ಸ್ಥಳದಲ್ಲಿಯೇ ಮೃತ ಪಟ್ಟಿದ್ದು ಮಹಿಳೆಯೊಬ್ಬಳು ಗಂಭೀರವಾಗಿ ಗಾಯಗೊಂಡ …

Leave a Reply

Your email address will not be published. Required fields are marked *